ಪೂರ್ಣತೆಯೇ ಗುರು:
ಗುರುಪೂರ್ಣಿಮೆ ನಿಮಿತ್ತ ವಿಶೇಷ ಲೇಖನ

ಪೂರ್ಣತೆಯೇ ಗುರು: ಗುರುಪೂರ್ಣಿಮೆ ನಿಮಿತ್ತ ವಿಶೇಷ ಲೇಖನ
ನಮ್ಮ ಸನಾತನ ಪರಂಪರೆಯಲ್ಲಿ ಗುರುವಿಗೆ ಭಗವಂತನ ಸ್ಥಾನವನ್ನು ನೀಡಲಾಗಿದೆ. ಮನುಷ್ಯನ ಬದುಕನ್ನು ಅಜ್ಞಾನದ ಕತ್ತಲೆಯಿಂದ ಜ್ಞಾನದ ಬೆಳಕಿನೆಡೆಗೆ, ಪಶುತ್ವದಿಂದ ದೈವತ್ವದೆಡೆಗೆ ನಡೆಸುವವನೇ ನಿಜವಾದ ಗುರು. ಯೋಗ್ಯ ಗುರು ಮತ್ತು ಸ್ಪಷ್ಟ ಗುರಿಯುಳ್ಳ ವ್ಯಕ್ತಿ ನಿಸ್ಸಂದೇಹವಾಗಿ ಪರಿಪೂರ್ಣತೆಯೆಡೆಗೆ ಸಾಗಬಲ್ಲ. ಇಂತಹ ಆದರ್ಶ ಗುರುಪರಂಪರೆಯು ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಹಾಸುಹೊಕ್ಕಾಗಿದೆ, ಅದು ಸಕಲ ಅನುಯಾಯಿಗಳನ್ನು ಸದಾ ಮುನ್ನಡೆಸುತ್ತಾ ಬಂದಿದೆ.
ಪ್ರತಿವರ್ಷ ಆಷಾಢ ಮಾಸದ ಶುಕ್ಲ ಪಕ್ಷದ ಹುಣ್ಣಿಮೆಯಂದು ಗುರುಪೂರ್ಣಿಮೆ ಅಥವಾ ವ್ಯಾಸಪೂರ್ಣಿಮೆಯನ್ನು ಆಚರಿಸಲಾಗುತ್ತದೆ. ಈ ದಿನವೇ ಮಹರ್ಷಿ ವೇದವ್ಯಾಸರು ಅವತರಿಸಿದ ಪವಿತ್ರ ದಿನ ಎಂದು ಪ್ರತೀತಿ. ವೇದಗಳು ಮೊದಲು ಒಂದೇ ಆಗಿದ್ದವು. ಅವುಗಳನ್ನು ನಾಲ್ಕು ಭಾಗಗಳಾಗಿ ವಿಂಗಡಿಸಿದವರು ವೇದವ್ಯಾಸರು. ‘ವ್ಯಾಸ’ ಎಂದರೆ ವಿಂಗಡಿಸುವ ಎಂದರ್ಥ. ವೇದಗಳನ್ನು ವಿಂಗಡಿಸಿದ್ದರಿಂದಲೇ ಅವರಿಗೆ ವೇದವ್ಯಾಸ ಎಂಬ ಹೆಸರು ಬಂತು. ಸಾಮಾನ್ಯವಾಗಿ ಜುಲೈ ತಿಂಗಳಿನಲ್ಲಿ ಬರುವ ಆಷಾಢ ಮಾಸದ ಪೂರ್ಣಿಮೆಯನ್ನು ಗುರುಪೂರ್ಣಿಮಾ ಅಥವಾ ವ್ಯಾಸಪೂರ್ಣಿಮಾ ಎಂದು ಸಂಭ್ರಮದಿಂದ ಆಚರಿಸಲಾಗುತ್ತದೆ.
ಯಾವುದೇ ವಿದ್ಯೆಯನ್ನು ಕಲಿಯಬೇಕಾದರೆ ಗುರುವಿನ ಪಾತ್ರ ಅತ್ಯಂತ ಹಿರಿದು. “ಗು” ಎಂದರೆ ಅಜ್ಞಾನ, “ರು” ಎಂದರೆ ಅದನ್ನು ಹೋಗಲಾಡಿಸುವವನು. ಯಾರು ನಮ್ಮ ಅಜ್ಞಾನವನ್ನು ಹೋಗಲಾಡಿಸುವರೋ ಅವರೇ ನಮ್ಮ ಗುರು. ಮಂತ್ರ, ಪೂಜೆ, ದೇವರ ವಿಷಯವಾಗಿ ತಿಳಿಸುವವರು ಶಿಕ್ಷಾಗುರುಗಳಾದರೆ, ಪರಮಾತ್ಮನ ಸಾಕ್ಷಾತ್ಕಾರ ಮಾಡಿಸುವವರು ಆಧ್ಯಾತ್ಮಿಕ ಗುರುಗಳು. ಗುರುಪೂರ್ಣಿಮೆಯಂದು ಗುರುಗಳಿಗೆಲ್ಲರಿಗೂ ಗೌರವಿಸಿ ನಮಸ್ಕರಿಸುವ ಸಂಪ್ರದಾಯವಿದೆ. ಎಲ್ಲಾ ಕಾರ್ಯಗಳಿಗೆ ಮೊದಲು ಗುರುಪೂಜೆ ಮಾಡಿಯೇ ತೀರಬೇಕು. ವೇದ ಮಂತ್ರಗಳನ್ನು ಹೇಳುವಾಗ ಮೊದಲು “ಶ್ರೀ ಗುರುಭ್ಯೋ ನಮಃ ಹರಿಃ ಓಂ” ಎಂದು ಹೇಳಿಯೇ ಪ್ರಾರಂಭಿಸಬೇಕು.
ಈ ಗುರುಪೂರ್ಣಿಮಾ ದಿವಸದಂದು ಚಾತುರ್ಮಾಸ್ಯ ವ್ರತವನ್ನು ಮಹಾಗುರು ವ್ಯಾಸರ ಪೂಜೆಯಿಂದ ಪ್ರಾರಂಭಿಸುತ್ತಾರೆ. ನಾಲ್ಕು ತಿಂಗಳು ನಡೆದು ಕಾರ್ತಿಕ ಪೂರ್ಣಿಮೆಯಂದು ಈ ವ್ರತ ಮುಕ್ತಾಯವಾಗುತ್ತದೆ. ಈ ಚಾತುರ್ಮಾಸ್ಯ ವ್ರತವನ್ನು ಶ್ರದ್ಧಾ ಭಕ್ತಿಗಳಿಂದ ಆಚರಿಸುವವರಿಗೆ ಸಮೃದ್ಧ ಆಹಾರ, ಸೌಂದರ್ಯ, ಸದ್ಬುದ್ಧಿ, ಸತ್ಸಂತಾನ ದೊರೆಯುವುದೆಂಬ ನಂಬಿಕೆಯಿದೆ. ಇದೇ ದಿವಸ ವೇದವ್ಯಾಸರು ಬ್ರಹ್ಮ ಸೂತ್ರ ಬರೆಯಲು ಪ್ರಾರಂಭಿಸಿದ್ದು, ಹಾಗೂ ಏಕಲವ್ಯನು ಗುರು ದ್ರೋಣಾಚಾರ್ಯರಿಗೆ ಗುರು ಕಾಣಿಕೆಯಾಗಿ ತನ್ನ ಬಲಗೈ ಹೆಬ್ಬೆರಳನ್ನು ಕತ್ತರಿಸಿಕೊಟ್ಟಿದ್ದು ಕೂಡ ಗುರುಪೂರ್ಣಿಮೆಯ ದಿವಸವೇ.
ಎಲ್ಲಿಯವರೆಗೆ ಕರ್ಮ ಬಂಧನದಿಂದ ಮುಕ್ತಿ ಇಲ್ಲವೋ ಅಲ್ಲಿಯವರೆಗೆ ಈ ಬ್ರಹ್ಮನೊಡನೆ ಒಂದಾಗಲು ಸಾಧ್ಯವಿಲ್ಲ. ಇದನ್ನು ಸದ್ಗುರು ನೀಡುವ ಜ್ಞಾನವೆಂಬ ಕತ್ತರಿಯಿಂದ ಮಾತ್ರ ತೆಗೆದುಹಾಕಲು ಸಾಧ್ಯ. ಜ್ಞಾನವನ್ನು ಕೊಡುವವನೇ ಗುರು. ಜ್ಞಾನ ಎಂದರೆ ನಮ್ಮ ಬುದ್ಧಿ. ಮತ್ತೆ ಕೆಲವರು ಕೆಲವು ಶಾಸ್ತ್ರಗಳಲ್ಲಿರುವ ಶಬ್ದವನ್ನು ಜ್ಞಾನ ಎನ್ನುವರು. ಇವುಗಳೆಲ್ಲಾ ನಮ್ಮ ಪಂಚೇಂದ್ರಿಯಗಳ ಮೂಲಕ ಪ್ರಾಪ್ತವಾಗುವ ಜ್ಞಾನ. ಗುರು ಎಂದರೆ ಅಖಂಡ ಜ್ಞಾನ ಜ್ಯೋತಿ. ಜಡತ್ವಕ್ಕೆ ಸ್ಫೂರ್ತಿ ತುಂಬಿ, ಶಿಷ್ಯನ ಅಜ್ಞಾನವನ್ನು ನಿವಾರಿಸಿ, ತಾನು ಬೆಳಗಿ ತನ್ನಂತೆ ಇತರರನ್ನು ಬೆಳಗಿಸುವವನೇ ನಿಜವಾದ ಗುರು. ಗುರು ದೊರಕದಿದ್ದರೂ ಗುರುವಿನ ಮೂರ್ತಿಯನ್ನಿಟ್ಟು ಪೂಜಿಸಿ ಅವನಿಂದ ವಿದ್ಯೆ ಪಡೆದ ಏಕಲವ್ಯ ಬಾಲಕ ಆದರ್ಶ ಶಿಷ್ಯನಾದರೆ, ಗುರ್ವಾಜ್ಞೆಯನ್ನು ನಿಷ್ಠೆಯಿಂದ ಪಾಲಿಸಿ ಗುರೂಪದೇಶ ಪಡೆದ ದಾನಶೂರ ಕರ್ಣ ಶ್ರೇಷ್ಠ ಶಿಷ್ಯನಾಗಿದ್ದಾನೆ. ನಮ್ಮ ದೇಶದ ಪ್ರಥಮ ಉಪರಾಷ್ಟ್ರಪತಿ ಡಾ. ಎಸ್. ರಾಧಾಕೃಷ್ಣನ್ ಅವರು ಗುರುವಿನ ಮಹತ್ವವನ್ನು ಸಾರಲು ತಮ್ಮ ಜನ್ಮದಿನವನ್ನೇ ‘ಶಿಕ್ಷಕರ ದಿನಾಚರಣೆ’ಯನ್ನಾಗಿ ಆಚರಿಸಲು ಕರೆ ನೀಡಿದರು. ಅವರ ಶಿಷ್ಯರು ಅವರನ್ನು ರೈಲ್ವೆ ಸ್ಟೇಷನ್ಗೆ ಚಕ್ಕಡಿಯಲ್ಲಿ ಕುಳ್ಳಿರಿಸಿಕೊಂಡು ತಾವೇ ಹೆಗಲು ಹಚ್ಚಿ ಎಳೆದುಕೊಂಡು ಹೋದದ್ದು, ಶಿಷ್ಯರು ಗುರುವಿಗೆ ತೋರಿದ ಅದಮ್ಯ ಗುರುಭಕ್ತಿಗೆ ಸಾಕ್ಷಿಯಾಗಿದೆ.
ಒಂದು ಸುವ್ಯವಸ್ಥಿತ, ವೈಭವಶಾಲಿ ಸಮಾಜ ನಿರ್ಮಾಣಗೊಳ್ಳುವುದು ಆ ಸಮಾಜದಲ್ಲಿನ ಪ್ರತಿಯೊಬ್ಬ ವ್ಯಕ್ತಿಯ ಚಿಂತನೆಯಿಂದ ಮತ್ತು ಆ ಚಿಂತನೆಗಳಿಗನುಗುಣವಾದ ಆತನ ಜೀವನ ಪದ್ಧತಿಯಿಂದ. ಹೀಗೆ ಸುಸಂಪನ್ನ ರಾಷ್ಟ್ರದ ನಿರ್ಮಿತಿಗಾಗಿ ಪರಂಪರಾಗತ ಮೌಲ್ಯಗಳ ಅರಿವುಳ್ಳ ಪ್ರತಿವ್ಯಕ್ತಿಯ ಕೊಡುಗೆಯೂ ಮಹತ್ವಪೂರ್ಣ. ಆದರೆ ಮನುಷ್ಯನು ಯಾವಾಗಲೂ ಭಿನ್ನ ಭಿನ್ನ ಪರಿಸ್ಥಿತಿಗಳಿಂದ ಸುತ್ತುವರಿಯಲ್ಪಟ್ಟಿರುತ್ತಾನೆ. ಸುಖ-ದುಃಖಗಳ ಅನೇಕ ಪ್ರಸಂಗಗಳನ್ನು ಆತ ಎದುರಿಸಬೇಕಾಗುತ್ತಿರುತ್ತದೆ. ಇಂತಹ ವಿಷಮ ಸಂದರ್ಭಗಳಲ್ಲಿ ಧೀರತೆಯಿಂದ ಅಪಾಯಗಳನ್ನು ನಿವಾರಿಸಿಕೊಳ್ಳುತ್ತಾ ತನ್ನ ಜೀವನವನ್ನು ಉನ್ನತ ಉದ್ದೇಶಗಳಿಗಾಗಿಯೇ ಮೀಸಲಿರಿಸಿಕೊಳ್ಳುವ ಯೋಗ್ಯತೆ ಆತನಲ್ಲಿರುವುದಿಲ್ಲ. ತನ್ನಲ್ಲಿಯೇ ಅಂತಹ ಯೋಗ್ಯತೆ ಇದೆಯೆಂದು ಯಾವನು ಭಾವಿಸುತ್ತಾನೋ ಆತನ ಅಧಃಪತನ ನಿಶ್ಚಿತವೆಂದು ತಿಳಿಯಬಹುದು. ಪ್ರತಿ ವ್ಯಕ್ತಿಯ, ತನ್ಮೂಲಕ ಇಡೀ ಸಮಾಜದ ಪತನವನ್ನು ತಡೆದು ಪರಿಪೂರ್ಣ ವಿಕಾಸದೆಡೆಗೆ ಸಾಗಲು ಬೇಕಾದ ಬಲವಾದ ಶ್ರದ್ಧಾ ಕೇಂದ್ರವೇ ‘ಗುರು’.
“ಗುರು ಬ್ರಹ್ಮ ಗುರು ವಿಷ್ಣು ಗುರು ದೇವೋ ಮಹೇಶ್ವರಃ” “ಗುರು ಸಾಕ್ಷಾತ್ ಪರ ಬ್ರಹ್ಮ ತಸ್ಮೈ ಶ್ರೀ ಗುರವೇ ನಮಃ” ಎಂದು ಗುರುವಿನೆಡೆಗೆ ನಮ್ಮ ಪೂರ್ವಿಕರು ತಮ್ಮ ಭಕ್ತಿಯನ್ನು ಮೆರೆದಿದ್ದಾರೆ. ಇದೊಂದು ಗುರು-ಶಿಷ್ಯರ ಪರಂಪರೆಯನ್ನು ಭದ್ರಪಡಿಸಿ ಜಗತ್ತಿಗೆ ಸಾರುವ ಹಬ್ಬವೆಂತಲೂ ಹೇಳಬಹುದು. “ನ ಚೋರ ಹಾರ್ಯಂ ನ ಚ ರಾಜ ಹಾರ್ಯಂ. ನ ಭ್ರಾತೃಭಾಜ್ಯಂ ನ ಚ ಭಾರಕಾರಿ. ವ್ಯಯೇಕೃತೇ ವರ್ಧತ ಏವ ನಿತ್ಯಂ. ವಿದ್ಯಾಧನಂ ಸರ್ವ ಧನಃ ಪ್ರಧಾನಂ.” ಅಂದರೆ ವಿದ್ಯೆಯನ್ನು ಯಾವ ಕಳ್ಳಕಾಕರಿಂದಲೂ ಮೋಸಮಾಡಿ ಕದ್ದೊಯ್ಯಲು ಸಾಧ್ಯವಿಲ್ಲ, ಯಾವ ರಾಜನೂ ಕೂಡ ತನ್ನ ಸಾಮರ್ಥ್ಯ ಮತ್ತು ದರ್ಪದಿಂದ ವಶಪಡಿಸಿಕೊಳ್ಳಲು ಸಾಧ್ಯವಿಲ್ಲ. ಹೊತ್ತು ತಿರುಗಾಡಲು ಇದು ಭಾರವೂ ಅಲ್ಲ. ಹೇಗೆ ಖರ್ಚು ಮಾಡುತ್ತೇವೋ ಹಾಗೆ ನಿತ್ಯವೂ ವರ್ಧಿಸುವಂತಹ, ಎಲ್ಲ ಸಂಪತ್ತಿಗಿಂತಲೂ ಶ್ರೇಷ್ಠವಾದುದು ಎಂದರ್ಥ. ಇಂತಹ ಅತ್ಯಮೂಲ್ಯ ಸಂಪತ್ತನ್ನು ಧಾರೆ ಎರೆದ ಸಮಸ್ತ ಗುರುವೃಂದಕ್ಕೆ ಕೋಟಿ ನಮನಗಳನ್ನು ಸಲ್ಲಿಸೋಣ.
✍. ವಿವೇಕ್ ನರೇನ್