ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಇದ್ದಲ್ಲಿ ಸಹಕಾರ ಸಂಘಗಳ ಬಲವರ್ಧನೆ ಸಾಧ್ಯ; ಎಂ.ಸಿ.ನಾಣಯ್ಯ

Reading Time: 5 minutes

ಮಡಿಕೇರಿ: ಸಹಕಾರ ಸಂಘಗಳು ಆರ್ಥಿಕ ಪ್ರಗತಿಯನ್ನು ಮತ್ತಷ್ಟು ವೃದ್ಧಿಸಿಕೊಂಡು, ಕೃಷಿಕರು ಹಾಗೂ ಬಡವರಿಗೆ ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಬೆಳವಣಿಗೆಗೆ ಸಹಕರಿಸುವಂತೆ ಹಿರಿಯ ಸಹಕಾರಿ ಹಾಗೂ ಮಾಜಿ ಸಚಿವರಾದ ಎಂ.ಸಿ.ನಾಣಯ್ಯ ಅವರು ಸಲಹೆ ಮಾಡಿದ್ದಾರೆ.

ನಗರದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಆವರಣದಲ್ಲಿ ಸಹಕಾರ ಸಪ್ತಾಹದ ಧ್ವಜಾರೋಹಣ ನಂತರ ಪಂದ್ಯಂಡ ಬೆಳ್ಯಪ್ಪ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

WhatsApp Group Banner

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಕಮ್ಯುನಿಟಿ ಲಿಂಕ್‌

ವಾಟ್ಸಾಪ್ ಕಮ್ಯುನಿಟಿ ಸೇರಿಕೊಳ್ಳಿ

ಸರ್ಚ್‌ ಕೊಡಗು ನಮ್ಮ ವಾಟ್ಸಾಪ್‌ ಚಾನಲ್‌ ಲಿಂಕ್‌

ವಾಟ್ಸಾಪ್ ಚಾನಲ್‌ ಫಾಲೋ ಮಾಡಿ

‘ಸಹಕಾರ ಕ್ಷೇತ್ರದಲ್ಲಿ ಯಾವುದೇ ರೀತಿಯ ಹಸ್ತಕ್ಷೇಪ ಇರಬಾರದು. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಇದ್ದಲ್ಲಿ ಸಹಕಾರ ಸಂಘಗಳ ಬಲವರ್ಧನೆ ಸಾಧ್ಯ ಎಂದರು.’

ಸಹಕಾರ ಸಂಘಗಳಿಗೆ ದೇಶದಲ್ಲಿ ತಮ್ಮದೇ ಆದ ಸ್ಥಾನವಿದ್ದು, ಸಂಪತ್ತನ್ನು ಎಲ್ಲರೂ ಹಂಚಿಕೊಂಡು ಸಮಾನವಾಗಿ ಬದುಕುವುದು ಸಹಕಾರದ ಧ್ಯೇಯೋದ್ದೇಶವಾಗಿದೆ ಎಂದು ಎಂ.ಸಿ.ನಾಣಯ್ಯ ಅವರು ತಿಳಿಸಿದರು.

ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕತೆ ಮತ್ತು ದಕ್ಷತೆ ಇದ್ದಲ್ಲಿ ಸಹಕಾರ ಸಂಘಗಳನ್ನು ಮತ್ತಷ್ಟು ಬಲಪಡಿಸಬಹುದಾಗಿದೆ. ಆ ನಿಟ್ಟಿನಲ್ಲಿ ಸಹಕಾರ ಸಂಘಗಳು ಪಕ್ಷಾತೀತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.

ಸಹಕಾರ ಸಂಘದಲ್ಲಿ ಲಕ್ಷಾಂತರ ಜನರು ಸದಸ್ಯತ್ವವನ್ನು ಹೊಂದಿದ್ದಾರೆ. ಸಹಕಾರ ಕ್ಷೇತ್ರಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಅವಕಾಶ ಮಾಡಬೇಕು. ಸಹಕಾರ ಸಂಘಗಳು ರಾಜಕೀಯ ರಹಿತವಾಗಿರಬೇಕು ಎಂದರು.

ರಾಜ್ಯದಲ್ಲಿ 21 ಕೇಂದ್ರ ಸಹಕಾರ ಬ್ಯಾಂಕುಗಳು ಇದ್ದು, ಕೊಡಗು ಜಿಲ್ಲೆಯ ಸಹಕಾರ ಬ್ಯಾಂಕು ಅತ್ಯುತ್ತಮವಾಗಿ ಆರ್ಥಿಕ ಚಟುವಟಿಕೆ ನಡೆಸಿಕೊಂಡು ಹೋಗುತ್ತಿರುವುದು ಶ್ಲಾಘನೀಯ ಎಂದು ಎಂ.ಸಿ.ನಾಣಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಅಧ್ಯಕ್ಷರಾದ ಕೊಡಂದೇರ ಬಾಂಡ್ ಗಣಪತಿ ಅವರು ಮಾತನಾಡಿ 71 ನೇ ಸಹಕಾರ ಸಪ್ತಾಹವನ್ನು ಆಚರಿಸಲಾಗುತ್ತಿದ್ದು, ಕೊಡಗು ಡಿಸಿಸಿ ಬ್ಯಾಂಕ್ ವತಿಯಿಂದ 3 ರಿಂದ 5 ಲಕ್ಷ ರೂ ವರೆಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿಕರಿಗೆ ಸಾಲ ನೀಡಲಾಗುತ್ತಿದ್ದು, ಕೃಷಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸಲಾಗುತ್ತಿದೆ ಎಂದರು.

ಸಹಕಾರ ಕಾಯ್ದೆ ತಿದ್ದುಪಡಿಯಿಂದ ಸಹಕಾರ ಸಂಘಗಳ ಬೆಳವಣಿಗೆ ಕಷ್ಟಸಾಧ್ಯ. ನೂತನ ಸಹಕಾರ ಕಾಯ್ದೆ ಜಾರಿಗೊಂಡಲ್ಲಿ ಸಹಕಾರ ಸಂಘಗಳು ಸ್ವಾಯತ್ತ ಸಂಸ್ಥೆಯಾಗಿ ಕಾರ್ಯನಿರ್ವಹಿಸಲು ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟರು.

ಸಹಕಾರ ಸಂಘಗಳು ಸಮರ್ಥವಾಗಿ ಬೆಳೆಯುವಲ್ಲಿ ಅವಕಾಶ ಮಾಡಬೇಕು. ಸಹಕಾರ ಸಂಘಗಳು ವಿಕೇಂದ್ರೀಕರಣ ಆಗಬೇಕು ಎಂಬ ಉದ್ದೇಶದಿಂದ ಜಾರಿಗೊಳಿಸಿದರೂ ಸಹ, ಸಹಕಾರಿಗಳಿಂದ ಒಂದು ಸಹಕಾರಿ ಸಂಸ್ಥೆ ಬೆಳೆಯುತ್ತದೆ ಎಂಬುದನ್ನು ಮನಗಾನಬೇಕು. ಪಂಚಾಯತ್ ರಾಜ್ ವ್ಯವಸ್ಥೆಗೂ, ಸಹಕಾರ ಸಂಘಗಳ ವ್ಯವಸ್ಥೆಗೂ ಬಹಳ ವ್ಯತ್ಯಾಸವಿದೆ. ಆದ್ದರಿಂದ ಈ ಬಗ್ಗೆ ಯೋಚಿಸಬೇಕು ಎಂದರು.

ಕೊಡಗಿನ ಸಹಕಾರ ಕ್ಷೇತ್ರ ರಾಜ್ಯಕ್ಕೆ ಮಾದರಿಯಾಗಿದೆ. ನಬಾರ್ಡ್ ಮೂಲಕ ಬರುವ ಸಾಲ ಸೌಲಭ್ಯ ಕಡಿಮೆಯಾಗಿರುವುದರಿಂದ ಕೃಷಿಕರಿಗೆ ಸಾಲ ಸೌಲಭ್ಯ ಒದಗಿಸುವುದು ಕಷ್ಟಸಾಧ್ಯವಾಗಿದೆ. ಆದ್ದರಿಂದ ನಮ್ಮ ಪಾಲನ್ನು ಬಿಡುಗಡೆ ಮಾಡಬೇಕು ಎಂದರು.

ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಸಂಸ್ಥೆಯ ನಿವೃತ್ತ ಪ್ರಾಂಶುಪಾಲರಾದ ಎಂ.ಎಂ.ಶ್ಯಾಮಲ ಅವರು ಮಾತನಾಡಿ ಸಹಕಾರ ಸಪ್ತಾಹದಲ್ಲಿ ಸಹಕಾರ ಸಂಘಗಳ ಪ್ರಗತಿ ಬಗ್ಗೆ ವಿಮರ್ಶೆಗಳು ನಡೆಯಬೇಕು ಎಂದು ಹೇಳಿದರು.

ಸಹಕಾರ ಚಳುವಳಿಯನ್ನು ಬಲಪಡಿಸಿ ಸಾಮೂಹಿಕ ಪ್ರಯತ್ನದಿಂದ ಪ್ರಗತಿ ಸಾಧಿಸುವುದು ಸಹಕಾರದ ತತ್ವವಾಗಿದೆ. ಸಹಕಾರ ಕ್ಷೇತ್ರದ ಆರ್ಥಿಕ ಬೆಳವಣಿಗೆಗೆ ಸಾಕಷ್ಟು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಶ್ಯಾಮಲ ಅವರು ಹೇಳಿದರು.

ಸಹಕಾರ ಕ್ಷೇತ್ರದಲ್ಲಿ ಕೃಷಿ, ತೋಟಗಾರಿಕೆ, ಹೈನುಗಾರಿಕೆ, ಮೀನುಗಾರಿಕೆ ಹೀಗೆ ವಿವಿಧ ರೀತಿಯ ಉದ್ಯೋಗಾವಕಾಶಗಳು ದೊರೆಯಲಿವೆ. ಆ ನಿಟ್ಟಿನಲ್ಲಿ ಸಹಕಾರ ಕ್ಷೇತ್ರ ಬಲಪಡಿಸಲು ಮುಂದಾಗಬೇಕಿದೆ. ಹೊಸ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಸಹಕಾರ ಕ್ಷೇತ್ರವನ್ನು ಮತ್ತಷ್ಟು ಸುಧಾರಿಸಬೇಕು. ಮೂಲ ಸೌಲಭ್ಯ ಅಭಿವೃದ್ಧಿಗೆ ಒತ್ತು ನೀಡಬೇಕು ಎಂದರು.

‘ಸಮಗ್ರ ಗ್ರಾಮೀಣ ಅಭಿವೃದ್ಧಿ ಸಾಧಿಸುವುದೇ ಸಹಕಾರ ಕ್ಷೇತ್ರದ ಮೂಲ ಉದ್ದೇಶವಾಗಿದೆ. ಆ ನಿಟ್ಟಿನಲ್ಲಿ ವೃತ್ತಿಪರತೆ, ಪಾರದರ್ಶಕತೆ ಕಾಪಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದಲ್ಲಿ ಸಹಕಾರ ಕ್ಷೇತ್ರವನ್ನು ಅಭಿವೃದ್ಧಿಪಡಿಸಬೇಕು ಎಂದು ಶ್ಯಾಮಲ ಅವರು ತಿಳಿಸಿದರು.’

ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷರಾದ ಕೇಟೋಳಿರ ಎಸ್.ಪೂವಯ್ಯ, ನಿರ್ದೇಶಕರಾದ ಹೊಟ್ಟೆಂಗಡ ಎಂ.ರಮೇಶ್, ಹೊಸೂರು ಸತೀಶ್ ಕುಮಾರ್, ಕೆ.ಅರುಣ್ ಭೀಮಯ್ಯ, ಕಾಂಗೀರ ಎನ್.ಸತೀಶ್, ಪೂಳಂಡ ಪಿ.ಪೆಮ್ಮಯ್ಯ, ಎಚ್.ಕೆ.ಮಾದಪ್ಪ, ಎಸ್.ಸಿ.ಶರತ್‍ಶೇಖರ್, ಶರವಣ ಕುಮಾರ್ ಟಿ.ಆರ್., ಗುಮ್ಮಟ್ಟೀರ ಎಸ್.ಕಿಲನ್ ಗಣಪತಿ, ಜಲಜಾ ಶೇಖರ್, ವೃತ್ತಿಪರ ನಿರ್ದೇಶಕರಾದ ಮುಂಡಂಡ ಸಿ.ನಾಣಯ್ಯ, ಡಿಸಿಸಿ ಬ್ಯಾಂಕಿನ ಸಿಇಒ ಪ್ರವೀಣ್ ಬಿ ನಾಯಕ್, ಪ್ರಧಾನ ವ್ಯವಸ್ಥಾಪಕಿ ಬೋಜಮ್ಮ ಜಿ.ಎಂ ಇತರರು ಇದ್ದರು.

ಹಂಚಿಕೊಳ್ಳಿ
0 0 votes
Article Rating
Subscribe
Notify of
guest
0 Comments
Oldest
Newest Most Voted
Inline Feedbacks
View all comments
error: Content is protected !!
0
Would love your thoughts, please comment.x
()
x